ಬೆಂಗಳೂರು ಸೆ.11 ಸುಧೀರ್ಘ ಮೂರು ಗಂಟೆಗಳ ಕಾಲ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಚಿವ ಪ್ರಿಯಾಂಕಖರ್ಗೆ ಭಾಗವಹಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ಜತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಕೆಲಸ ಮಾಡಬೇಕಿದೆ ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಕರ್ನಾಟಕ ಪ್ರಜ್ಞಾವಂತರ ನಾಡು. ನಮ್ಮಲ್ಲಿ ಜಾತಿ ದೌರ್ಜನ್ಯಗಳಿಗೆ ಕಡಿವಾಣ ಹಾಕುವುದು ಅತ್ಯಗತ್ಯ.
ದೌರ್ಜನ್ಯಕ್ಕೆ ಒಳಗಾಗುವ ಶೋಷಿತರಿಗೆ ಸೂಕ್ತ ನ್ಯಾಯ ಒದಗಿಸಲು ಎಸ್.ಸಿ/ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ, ನಾಗರಿಕ ಹಕ್ಕು ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಈ ಕಾಯ್ದೆಗಳ ಸಮರ್ಪಕ ಜಾರಿಗೆ ಇಲಾಖೆಗಳ ನಡುವೆ ಸಮನ್ವಯತೆ ಇದ್ದಾಗ ಮಾತ್ರ ವ್ಯವಸ್ಥಿತವಾಗಿ ಈ ವರ್ಗದ ಜನರಿಗೆ ನ್ಯಾಯ ಸಿಗಲು ಸಾಧ್ಯವಾಗಲಿದೆ.
ರಾಜ್ಯದಲ್ಲಿ ಶೋಷಿತರಿಂದ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕೇವಲ ಶೇ. 3.44 ರಷ್ಟಿರುವುದು ನಾಚಿಕೆಯ ಸಂಗತಿ. ಈ ಹಿನ್ನಲೆಯಲ್ಲಿ ತಹಸೀಲ್ದಾರರು, ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಇದರ ಪ್ರಗತಿ ಪರಿಶೀಲನೆ ಮಾಡಬೇಕು. ತಾಲ್ಲೂಕು, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಲ್ಲಿ ಈ ವಿಷಯದ ಕುರಿತು ಕಡ್ಡಾಯವಾಗಿ ಪ್ರಗತಿ ಪರಿಶೀಲನೆ ಆಗಬೇಕು. ಪೊಲೀಸ್ ವರಿಷ್ಠಾಧಿಕಾರಿಗಳು ಈ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ, ಡಿ.ಜಿ.ಪಿ. ಅವರಿಗೆ ವರದಿ ಕಳುಹಿಸಬೇಕು ಎಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಿರ್ಣಯಿಸಿದೆ.
ಈ ಸಮಿತಿಯ ಸಭೆ ನಡೆಸಲು ಹಿಂದಿನ ಸರ್ಕಾರಕ್ಕೆ ಮನಸಿಲ್ಲದಿದ್ದ ಕಾರಣ ಹೈಕೋರ್ಟ್ ಆದೇಶಿಸಬೇಕಿತ್ತು. ಸಮಿತಿಯಲ್ಲಿ ಕೇವಲ ಸಚಿವರಿಗೆ ಮಾತ್ರ ಅವಕಾಶವಿತ್ತು. ಆದರೆ ನಮ್ಮ ಸರ್ಕಾರದಲ್ಲಿ ನಿಯಮಗಳಿಗೆ ತಿದ್ದುಪಡಿ ತಂದು ಈ ಸಮುದಾಯಗಳ ಸರ್ವಪಕ್ಷಗಳ ಸಚಿವರು, ಸಂಸದರು, ಶಾಸಕರನ್ನು ಸಭೆಗೆ ಆಹ್ವಾನಿಸಲಾಗಿತ್ತು.
ಎಲ್ಲರೊಂದಿಗೂ ಕೈ ಜೋಡಿಸಿ ಶೋಷಿತರ ವರ್ಗಗಳ ಜನರ ಕಲ್ಯಾಣಕ್ಕೆ ಮುಂದಾಗಿರುವುದು ನಮ್ಮ ಶೋಷಿತರ ಪರವಾಗಿ ಕಾಂಗ್ರೆಸ್ ಸರ್ಕಾರದ ಬದ್ಧತೆಯ ಪ್ರತೀಕವಾಗಿದೆ.
0 Comments