ಚಿತ್ರದುರ್ಗ ನ.17:
ಕರ್ನಾಟಕ ಪೊಲೀಸ್ ಇತರೆ ರಾಜ್ಯಗಳನ್ನು ಹೋಲಿಸಿದಾಗ ದೇಶದಲ್ಲಿಯೇ ಅತ್ಯುತ್ತಮ ಹಾಗೂ ಆಧುನಿಕವಾದ ಸೌಲಭ್ಯಗಳನ್ನು ಹೊಂದಿದೆ ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಹೇಳಿದರು.
ಇಲ್ಲಿನ ಬಸವೇಶ್ವರ ನಗರದ ಪೊಲೀಸ್ ವಸತಿ ಗೃಹದಲ್ಲಿ ರಾಜ್ಯ ಪೊಲೀಸ್, ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪೊಲೀಸ್ ಸಮುಚ್ಚಯ ಮತ್ತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ, ತಳಕು ಪೊಲೀಸ್ ಠಾಣೆಗಳ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚೆಗೆ ನಿರ್ಮಾಣ ಮಾಡಲಾಗಿರುವ ಕೆಲವು ಪೊಲೀಸ್ ಸ್ಟೇಷನ್ಗಳನ್ನು ಐಟಿ ಕಂಪನಿಗಳ ರೀತಿಯಲ್ಲಿ ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.
ತಂತ್ರಜ್ಞಾನದ ಸಹಾಯದಿಂದ ಪ್ರಸ್ತುತ ದಿನಗಳಲ್ಲಿ ಪೊಲೀಸರು ಅಪರಾಧಿಗಳನ್ನು ಶೀಘ್ರವೇ ಪತ್ತೆಹಚ್ಚುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ಪ್ರಕರಣಗಳನ್ನು ತ್ವರಿತಗತಿಯಲ್ಲಿ ಭೇದಿಸುವಲ್ಲಿ ಸನ್ನದ್ಧರಾಗಿದ್ದಾರೆ ಎಂದರು.
ಪೊಲೀಸ್ ಗೃಹ 2025 ಕಾರ್ಯಕ್ರಮದಲ್ಲಿ ಇನ್ನೂ 10 ಸಾವಿರ ಮನೆ ನಿರ್ಮಾಣ ಮಾಡುವ ಗುರಿ ಇದೆ. ಪೊಲೀಸ್ ವಸತಿ ನಿಗಮದಲ್ಲಿ ರೂ.600 ಕೋಟಿ ಅನುದಾನವಿದ್ದು, ಹೆಚ್ಚಿನ ರೀತಿಯಲ್ಲಿ ಸುಂದರವಾದ ಪೊಲೀಸ್ ಸಮುಚ್ಚಯ ನಿರ್ಮಾಣ ಮಾಡಲಾಗುವುದು ಎಂದರು.
ದೇಶದ ಕಾನೂನು ವ್ಯವಸ್ಥೆ ರಕ್ಷಣೆ ಮಾಡಬೇಕಾದರೆ ಅದು ಪೊಲೀಸ್ ಅವರಿಂದ ಮಾತ್ರ ಸಾಧ್ಯ. ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆಯಾಗಿದೆ. ಕಾನೂನು ರಕ್ಷಣೆ ಮಾಡುವ ಅಧಿಕಾರ ಪೊಲೀಸ್ ಇಲಾಖೆಗೆ ನೀಡಲಾಗಿದೆ. ಹಾಗಾಗಿ ಪೊಲೀಸರನ್ನು ನಾವು ಸರಿಯಾಗಿ ನೋಡಿಕೊಳ್ಳುವ ಅಗತ್ಯ ಬಹಳಷ್ಟಿದೆ ಎಂದು ಹೇಳಿದರು.
ಪೊಲೀಸ್ ಇಲಾಖೆಯಲ್ಲಿ 1.10 ಲಕ್ಷ ಸಿಬ್ಬಂದಿ ಇದ್ದು, ಇದರಲ್ಲಿ ಕನಿಷ್ಟ 70 ರಿಂದ 80 ಸಾವಿರ ಸಿಬ್ಬಂದಿಗೆ ಪೊಲೀಸ್ ವಸತಿ ಸಮುಚ್ಚಯ ನಿರ್ಮಾಣ ಮಾಡಿಕೊಡಬೇಕು ಎಂಬ ಸಂಕಲ್ಪ ಹೊಂದಿದ್ದು, ಒಂದು ಯೋಜನೆಯನ್ನಾಗಿ ಮಾಡಿ ವಸತಿ ಸಮುಚ್ಚಯ ನಿರ್ಮಾಣ ಕಾರ್ಯವನ್ನು ವ್ಯವಸ್ಥಿತವಾಗಿ ಮಾಡಿಕೊಡಲಾಗುವುದು ಎಂದರು.
ನಾನು ಮೂರನೇ ಬಾರಿಗೆ ಗೃಹ ಸಚಿವನಾಗಿ ಅಧಿಕಾರ ಸ್ವೀಕರಿಸಿದ್ದು, ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಮಾಡುವ ನಿಟ್ಟಿನಲ್ಲಿ “ಪೊಲೀಸ್ ಗೃಹ” ಯೋಜನೆಯನ್ನು ಮಾಡಿ 10 ಸಾವಿರ ಮನೆಗಳನ್ನು ಕಟ್ಟಲಾಗುತ್ತಿದೆ. ಪೊಲೀಸ್ ಕುಟುಂಬಕ್ಕೆ ಅನಿಲ ಸಂಪರ್ಕ, ತ್ಯಾಜ್ಯ ವಿಲೇವಾರಿ, ಆಧುನಿಕ ಮಾದರಿಯ ಕಿಚನ್ ಸೇರಿದಂತೆ ನವೀನ ಮಾದರಿಗೆ ಅನುಗುಣವಾಗಿ ಅತ್ಯುತ್ತಮ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಪ್ರಾರಂಭದಲ್ಲಿ ಒಂದು ಘಟಕ ವೆಚ್ಚಕ್ಕೆ ರೂ.16 ಲಕ್ಷ ಇತ್ತು, ಇದೀಗ ರೂ.20 ಲಕ್ಷಕ್ಕೆ ಏರಿಕೆಯಾಗಿದೆ. ಬಹಳ ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗಿದೆ. ಪೊಲೀಸ್ ಸಮುಚ್ಚಯದಲ್ಲಿ ಪೊಲೀಸ್ ಸಿಬ್ಬಂದಿ ಅಗತ್ಯವಾದ ಉತ್ತಮ ಸೌಲಭ್ಯಗಳನ್ನು ಒದಗಿಸಿಕೊಡಲಾಗಿದೆ ಎಂದರು.
ಪೊಲೀಸ್ ಸಿಬ್ಬಂದಿಗೆ ಉತ್ತಮ ಸೌಲಭ್ಯ ಒದಗಿಸಿದರೆ ಅವರು ಒಳ್ಳೆಯ ಕೆಲಸಗಳನ್ನು ನಿರ್ವಹಿಸುತ್ತಾರೆ ಎಂದು ಹೇಳಿದ ಅವರು, ಪ್ರಸ್ತುತ ದಿನಗಳಲ್ಲಿ ಪೊಲೀಸ್ ಇಲಾಖೆ ಹೊಸ ಬದಲಾವಣೆ ಕಾಣುತ್ತಿದೆ. ಹೊಸ ರೂಪದಲ್ಲಿ ಅನೇಕ ರೀತಿಯ ಕ್ರೈಂಗಳು ಆಗುವುದಕ್ಕೆ ಪ್ರಾರಂಭವಾಗಿವೆ. ಸೈಬರ್ ಕ್ರೈಂ ವಿಶ್ವದಲ್ಲಿಯೇ ಹೊಸ ಆಯಾಮ ಪಡೆದುಕೊಂಡಿದೆ. ಇದಕ್ಕೆ ಅನುಗುಣವಾಗಿ ಪೊಲೀಸ್ ಇಲಾಖೆ ಕೂಡ ಆಧುನಿಕ ತಂತ್ರಜ್ಞಾನ ಹಾಗೂ ವೈಜ್ಞಾನಿಕವಾಗಿ ಅಪರಾಧ ಪತ್ತೆ ಕಾರ್ಯವನ್ನು ತ್ವರಿತವಾಗಿ ಮಾಡುತ್ತಿದೆ ಎಂದು ಹೇಳಿದರು.
15 ಸಾವಿರ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ: ರಾಜ್ಯದಲ್ಲಿ ಪ್ರಸ್ತುತ 15 ಸಾವಿರ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇವೆ. ಕಳೆದ ನಾಲ್ಕು ವರ್ಷದಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಪ್ರಸ್ತುತ ದಿನಗಳಲ್ಲಿ ಪೊಲೀಸ್ ಕಾನ್ಸ್ಟೇಬಲ್ಗಳ ಅಗತ್ಯತೆ ಇದೆ. ಪ್ರತಿ ವರ್ಷವೂ 3 ಸಾವಿರ ಪೊಲೀಸ್ ಸಿಬ್ಬಂದಿ ನಿವೃತ್ತಿ ಹೊಂದುತ್ತಿದ್ದಾರೆ. ಹಾಗಾಗಿ ಸ್ಥಗಿತಗೊಂಡಿದ್ದ ಪೊಲೀಸ್ ಕಾನ್ಸ್ಟೇಬಲ್ಗಳ ನೇಮಕಾತಿಗೆ ಚಾಲನೆ ನೀಡಲಾಗುವುದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಸಿದರು.
ಪೊಲೀಸ್ ಕಾನ್ಸ್ಟೇಬಲ್ಗೆ ಕನಿಷ್ಟ ವಿದ್ಯಾರ್ಹತೆ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಹತೆಯಾಗಿದೆ. ಆದರೆ ಈ ಹುದ್ದೆಗೆ ಬಿಇ, ಎಂಬಿಎ, ಎಂಎ ಎಂಇಡಿ ಸೇರಿದಂತೆ ಶೇ.60ರಷ್ಟು ಅರ್ಜಿಗಳು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳೇ ಹೆಚ್ಚಾಗಿ ಅರ್ಜಿ ಸಲ್ಲಿಸುತ್ತಾರೆ. ಇದರ ಅರ್ಥ ಪೊಲೀಸ್ ಹುದ್ದೆ ಕೂಡ ಗೌರವಯುತವಾಗಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಅಭಿಪ್ರಾಯಪಟ್ಟರು.
ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಎನ್ನುವ ಉದ್ದೇಶದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಈವರೆಗೆ 25 ಕೋಟಿ ಜನ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಮಹಿಳೆಯರನ್ನು ಸಬಲರನ್ನಾಗಿ, ಸ್ವಾವಲಂಬಿಯನ್ನಾಗಿ ಮಾಡುತ್ತಿದೆ ಎಂದರು.
ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಕಂಡುಬಂದ ಅಂಶವೆಂದರೆ, ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿವೆ ಎಂಬುದು ಗಮನಾರ್ಹವಾಗಿದೆ. ನಮ್ಮ ಸರ್ಕಾರ ನೀಡುತ್ತಿರುವ ಉಚಿತ ವಿದ್ಯುತ್, ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ ಮುಂತಾದ ಯೋಜನೆಗಳು ರೈತರಿಗೆ ತಲುಪುವಂತಹ ಯೋಜನೆಯಾಗಿವೆ. ಜನರ ಹಣ ಜನರಿಗೆ ಕೊಡುತ್ತಿದ್ದೇವೆ, ಹೀಗಾಗಿ ಇದು ಸರ್ಕಾರಕ್ಕೆ ನಷ್ಟ ಎಂದು ಪರಿಗಣಿಸುವುದು ಸರಿಯಲ್ಲ ಎಂದು ಗೃಹ ಸಚಿವರು ಹೇಳಿದರು.
ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಮಾತನಾಡಿ, ಚಿತ್ರದುರ್ಗ ಹಾಗೂ ಹಿರಿಯೂರು ನಗರಕ್ಕೆ ಪೊಲೀಸ್ ವಸತಿ ಸಮುಚ್ಚಯ ಹಾಗೂ ಚಳ್ಳಕೆರೆ, ಹಿರಿಯೂರು ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಅಗತ್ಯವಾಗಿ ಬೇಕಾಗಿದೆ. ಇದರ ಜೊತೆಗೆ ಹೊಸದುರ್ಗದಲ್ಲಿ ಹೆಚ್ಚುವರಿ ಪೊಲೀಸ್ ಠಾಣೆ, ಚಿಕ್ಕಜಾಜೂರಿನಲ್ಲಿ ಪೊಲೀಸ್ ಠಾಣೆ ಸ್ಥಾಪನೆಗೆ ಅವಕಾಶ ಮಾಡಿಕೊಡಬೇಕು. ಇದರಿಂದ ಆಡಳಿತ ಸುಗಮವಾಗಲು ಅನುಕೂಲವಾಗಲಿದೆ ಎಂದು ಗೃಹ ಸಚಿವರಿಗೆ ಮನವಿ ಮಾಡಿದರು.
ಬೆಂಗಳೂರು ಕೆ.ಎಸ್.ಪಿ.ಹೆಚ್ ಮತ್ತು ಐ.ಡಿ.ಸಿ.ಎಲ್ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೆ.ರಾಮಚಂದ್ರರಾವ್ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿ 72 ಪೊಲೀಸ್ ವಸತಿ ಗೃಹಗಳು ಹಾಗೂ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ, ತಳಕು ಪೊಲೀಸ್ ಠಾಣೆಗಳನ್ನು ರೂ. 25 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ಇಲ್ಲಿಯವರೆಗೂ 31 ಸಾವಿರ ಪೊಲೀಸ್ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.
ಪೊಲೀಸ್ ಠಾಣೆಗಳನ್ನು ಸ್ವಾಫ್ಟ್ವೇರ್ ಕಂಪನಿ ಕಚೇರಿಗಳ ಮಾದರಿಯಲ್ಲಿ ಕಟ್ಟಲಾಗಿದ್ದು, ಇದರಲ್ಲಿ ವಿವಿಧ ಸೌಲಭ್ಯಗಳನ್ನು ಕೂಡ ಕಲ್ಪಿಸಲಾಗಿದೆ. ಬೇರೆ ರಾಜ್ಯಕ್ಕೆ ಹೋಲಿಕೆ ಮಾಡಿದರೆ ನಮ್ಮ ಕರ್ನಾಟಕದ ಪೊಲೀಸ್ ಠಾಣೆಗಳು ಹಾಗೂ ಪೊಲೀಸ್ ವಸತಿ ಗೃಹಗಳು ಅತ್ಯುತ್ತಮ ಸೌಲಭ್ಯ ಹೊಂದಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಸಿ. ವೀರೇಂದ್ರ ಪಪ್ಪಿ, ಟಿ.ರಘುಮೂರ್ತಿ, ಬಿ.ಜಿ. ಗೋವಿಂದಪ್ಪ, ದಾವಣಗೆರೆ ಪೂರ್ವ ವಲಯದ ಉಪ ಪೊಲೀಸ್ ಮಹಾ ನಿರೀಕ್ಷಕ ಡಾ.ಕೆ.ತ್ಯಾಗರಾಜ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ಜೆ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಧರ್ಮೇಂದ್ರ ಕುಮಾರ್ ಮೀನಾ, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಸೇರಿದಂತೆ ಮತ್ತಿತರರು ಇದ್ದರು.
ದೇಶದಲ್ಲಿಯೇ ಅತ್ಯುತ್ತಮ ಸೌಲಭ್ಯ ಕರ್ನಾಟಕ ಪೊಲೀಸ್ ಹೊಂದಿದೆ – ಗೃಹ ಸಚಿವ ಡಾ.ಜಿ.ಪರಮೇಶ್ವರ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments