ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಹೆಚ್ಚಿನ ಜಾಗೃತಿ ಅಗತ್ಯ: ನ್ಯಾ.ರಾಜೇಶ್ ಎನ್.ಹೊಸಮನೆ

by | 21/11/23 | ಜನಧ್ವನಿ


ಬಳ್ಳಾರಿ,ನ.21
ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಕಿತ್ತು ಹಾಕಲು ಸಮುದಾಯದ ಜನರಿಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಅಭಿಪ್ರಾಯ ಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಬನ್ನಿ!! ಬಾಲಕಾರ್ಮಿಕರನ್ನು ದುಡಿತದಿಂದ ಬಿಡಿಸೋಣ, ಬನ್ನಿ!! ಮಕ್ಕಳ ಬಾಲ್ಯವನ್ನು ರಕ್ಷಿಸಿ, ಬೆಳೆಸಲು ಬದ್ದರಾಗೋಣ” ಎಂಬ ಘೋಷವಾಕ್ಯದೊಂದಿಗೆ “ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಮತ್ತು ತಿದ್ದುಪಡಿ ಕಾಯ್ದೆ 2016”ರ ಕುರಿತು ಜನ ಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸುವುದರ ಮೂಲಕ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.
ಮಕ್ಕಳು ರಾಷ್ಟ್ರದ ಸಂಪತ್ತು, ಕಲಿಯುವ ವಯಸ್ಸಿನ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಮಕ್ಕಳನ್ನು ಕೆಲಸದಲ್ಲಿ ನೇಮಿಸಿಕೊಳ್ಳುವುದು ಅಪರಾಧವಾಗಿದೆ. ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಮಕ್ಕಳನ್ನು ರಾಷ್ಟ್ರದ ಮುಖ್ಯವಾಹಿನಿಗೆ ಕರೆ ತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಾಗಿದೆ ಎಂದು ತಿಳಿಸಿದರು.
14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಿದ್ದು ಮತ್ತು 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ಸಂಜ್ಞೆಯ (ವಾರೆಂಟ್ ರಹಿತ ಬಂಧಿಸಬಹುದಾದ) ಅಪರಾಧವಾಗಿದೆ ಎಂದು ತಿಳಿಸಿದರು.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ನಿಯೋಜಿಸಿಕೊಂಡಲ್ಲಿ ಅಂತಹ ಮಾಲೀಕರಿಗೆ ಮೊದಲ ಅಪರಾಧಕ್ಕೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ರೂ.20 ಸಾವಿರದಿಂದ 50 ಸಾವಿರದವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.
ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ಅವರು ಮಾತನಾಡಿ, 6 ರಿಂದ 14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳಲ್ಲಿ ಹಾಗೂ 18 ವರ್ಷ ವಯಸ್ಸಿನವರೆಗಿನ ಕಿಶೋರರು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಯುವುದು ಕಂಡಲ್ಲಿ ತಕ್ಷಣವೇ ಪೆÇಲೀಸ್ ಇಲಾಖೆಗೆ ಸಂಪರ್ಕಿಸಿ ದೂರು ನೀಡಬೇಕು ಅಥವಾ ಅಂತರ್ಜಾಲ ಪೆನ್ಸಿಲ್ ಪೆÇೀರ್ಟಲ್‍ನ www.pencil.gov.in ನಲ್ಲಿ ದೂರು ಸಲ್ಲಿಸಬಹುದು ಎಂದು ತಿಳಿಸಿದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜನ ಜಾಗೃತಿ ಮೂಡಿಸುವ ಸಂಚಾರಿ ವಾಹನವು ಜಿಲ್ಲೆಯಾದ್ಯಂತ ಒಟ್ಟು 10 ದಿನಗಳ ಕಾಲ ಸಂಚರಿಸಿ ಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಯನ್ನು ಬೀದಿ ನಾಟಕದ ಮೂಲಕ ಜನ ಜಾಗೃತಿ ಮೂಡಿಸುವ ಚಿಗುರು ಕಲಾ ತಂಡಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನಿ ಅವರು ಹಲಗೆ ಬಾರಿಸುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ವಿಜಯ್ ಕುಮಾರ್, ಕಂಪ್ಲಿ ತಹಶೀಲ್ದಾರ ಗೌಸಿಯಾ ಬೇಗಂ, ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಬಾಲ ಮಂದಿರದ ಸಂಯೋಜಕ ಮಂಜುನಾಥ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು, ಡಿಸಿಪಿಯು ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ಇದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *