ಚಿತ್ರದುರ್ಗ. ಆ.21:
ಜಿಲ್ಲೆಯ ಗ್ರಾಮೀಣ ಜನರಲ್ಲಿ ಕುಡಿಯುವ ನೀರು, ಸ್ವಚ್ಛತೆ, ನೈರ್ಮಲ್ಯ ಪಾಲನೆ ಕುರಿತು ಜನ ಜಾಗೃತಿ ಮೂಡಿಸಲು ವಿಶೇಷ ಆಂದೋಲನ ಹಮ್ಮಿಕೊಂಡು, ಗ್ರಾಮೀಣ ಸಮುದಾಯದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಸಲುವಾಗಿ ಸಂಜೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳ ಕೇಂದ್ರಸ್ಥಾನದಲ್ಲಿ ಏಕಕಾಲಕ್ಕೆ ಪಂಜಿನ ಮೆರವಣಿಗೆ ಮೂಲಕ ಜಾಗೃತಿ ಮೂಡಿಸಲಾಯಿತು.
ಕಲುಷಿತ ನೀರು ಸೇವನೆಯಿಂದ ವಾಂತಿ-ಭೇದಿ ಪ್ರಕರಣಗಳು ವರದಿಯಾದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಆಶಯದಂತೆ, ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ವಚ್ಛತೆ, ನೈರ್ಮಲ್ಯತೆ ಕಾಪಾಡಿಕೊಳ್ಳಲು ಜನ ಜಾಗೃತಿಗಾಗಿ ವಿಶೇಷ ಆಂದೋಲನ ನಡೆಸಲಾಯಿತು.
ಸ್ವಚ್ಛತೆಯ ಕುರಿತು ಅರಿವು ಮೂಡಿಸಲು ಗ್ರಾಮೀಣ ಪ್ರದೇಶದಲ್ಲಿನ ಜನರ ಗಮನ ಸೆಳೆದು, ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುವುದು ಈ ಪಂಜಿನ ಮೆರವಣಿಗೆಯ ಉದ್ದೇಶವಾಗಿತ್ತು. ಹೀಗಾಗಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಏಕಕಾಲಕ್ಕೆ ಸಂಜೆಯ ವೇಳೆ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿನ ಪ್ರಮುಖ ರಸ್ತೆಗಳಲ್ಲಿ ಪಂಜಿನ ಮೆರವಣಿಗೆ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಲು ಧ್ವನಿವರ್ಧಕದ ಮೂಲಕ ಮುಖ್ಯ ಸಂದೇಶಗಳನ್ನು ನೀಡುವ ವ್ಯವಸ್ಥೆ ಮಾಡಲಾಯಿತು.
ಚಿತ್ರದುರ್ಗ ತಾಲ್ಲೂಕಿನ ಗೋನೂರು ಗ್ರಾಮ ಪಂಚಾಯಿತಿಯಲ್ಲಿ ಪಂಜಿನ ಮೆರವಣಿಗೆ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎನ್.ಸತೀಶ್ ರೆಡ್ಡಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎನ್.ಸತೀಶ್ ರೆಡ್ಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ವೈಯಕ್ತಿಕ ಗೃಹ ಶೌಚಾಲಯ ಬಳಕೆ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಬಗ್ಗೆ ಹಾಗೂ ನೀರಿನ ಮೂಲಗಳ ಹತ್ತಿರ ಸ್ವಚ್ಛತೆ ಕಾಪಾಡಿಕೊಳ್ಳುವ ಕುರಿತು ಮಾಹಿತಿ ನೀಡಿದರು. ನೀರನ್ನು ಕುದಿಸಿ, ಆರಿಸಿ ಕುಡಿಯುವುದು, ವೈಯಕ್ತಿಕ ಸ್ವಚ್ಛತೆ, ಆಹಾರ ಸೇವನೆಗೂ ಮುನ್ನ ಸಾಬೂನಿನಿಂದ ಕೈ ತೊಳೆದುಕೊಳ್ಳುವುದು, ಮನೆಗಳ ಸುತ್ತ ಮುತ್ತಲು ನೀರು ನಿಲ್ಲದಂತೆ ಸ್ವಚ್ಛತೆ ಕಾಯ್ದುಕೊಳ್ಳುವುದು ಮುಂತಾದ ವಿಷಯಗಳ ಬಗ್ಗೆ ಸಾರ್ವಜನಿಕರು ಅರಿವು ಹೊಂದಬೇಕು, ಈ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮತ್ತು ವೈಯಕ್ತಿಕ ಶುಚಿತ್ವ ಮತ್ತು ನೈರ್ಮಲ್ಯ ಕುರಿತ ಆಡಿಯೋ ಜಿಂಗಲ್ಸ್ ಸ್ವಚ್ಛ ವಾಹಿನಿ ಮೂಲಕವೂ ಜಾಗೃತಿ ಮೂಡಿಸಲಾಯಿತು. ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ಘೋಷಣೆ ಮತ್ತು ಭಿತ್ತಿಪತ್ರಗಳ ಪ್ರದರ್ಶನ ಮಾಡಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರಾದ ಬಿ.ಸಿ. ನಾಗರಾಜ್, ಬಿ. ಪ್ರಮೀಳಾ, ಟಿ.ಆರ್. ವಿನಯಕುಮಾರ್, ಹೆಚ್.ಆರ್. ಶಶಿಧರ್, ಜಿ.ಪಂ. ಸಹಾಯಕ ಯೋಜನಾಧಿಕಾರಿ ಸುಮಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶಾಲಾ ಮಕ್ಕಳು ಮತ್ತು ಶಿಕ್ಷಕರು, ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯಕರ್ತರು, ಮಹಿಳಾ ಒಕ್ಕೂಟದ ಸದಸ್ಯರು, ಸ್ಥಳೀಯ ಯುವಕ-ಯುವತಿ ಮಂಡಳಿಗಳು ಭಾಗವಹಿಸಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments